
ಬೆಂಗಳೂರು, ಜೂನ್ 24: ರಾಜ್ಯದಲ್ಲಿ ಮುಂಗಾರು ಮಾರುತಗಳು ತೀವ್ರಗೊಳ್ಳುತ್ತಿದ್ದು, ಜೂನ್ 24ರಿಂದ ಜೂನ್ 27ರ ವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ವೈಪರೀತ್ಯ ಎದುರಿಸಲು ಸಜ್ಜಾಗುವಂತೆ ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆಯ ಸಂದೇಶ ಹಾಗೂ ವಿವಿಧ ಹಂತದ ಅಲರ್ಟ್ಗಳನ್ನು ಘೋಷಿಸಲಾಗಿದೆ.
ಕರಾವಳಿ ತೀರದ ಜಿಲ್ಲೆಗಳಲ್ಲಿ ವಾತಾವರಣವು ಸಂಪೂರ್ಣವಾಗಿ ಬದಲಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಅಬ್ಬರ ಜೋರಾಗಲಿದೆ. ಜೂನ್ 27ರ ವರೆಗೆ ಈ ಭಾಗದ ಪ್ರತ್ಯೇಕ ಸ್ಥಳಗಳಲ್ಲಿ 64.5 ಮಿಲಿಮೀಟರ್ನಿಂದ 115.5 ಮಿಲಿಮೀಟರ್ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಳದಿ (Yellow Alert) ಮತ್ತು ಕೆಲವು ಕಡೆ ಕಿತ್ತಳೆ (Orange Alert) ಮುನ್ನೆಚ್ಚರಿಕೆ ನೀಡಲಾಗಿದೆ. ಬಿರುಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ ತಲುಪುವ ಸಾಧ್ಯತೆಯಿದೆ.
ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ಪ್ರಭಾವ ಹೆಚ್ಚಾಗಲಿದ್ದು, ಕೊಡಗು, ಹಾಸನ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಜೂನ್ 25 ಮತ್ತು 26ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಸಮುದ್ರ ತೀರ ಹಾಗೂ ನದಿ ಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗುವುದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ಸಹಿತ ಕೆಟ್ಟ ಹವಾಮಾನ ಇರಲಿ ಇರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



