
ಹೊಸದಿಲ್ಲಿ, ಜುಲೈ 30: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ವಿದ್ಯಾರ್ಥಿಗಳ ಸರಣಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ತಲುಪಲು ನಡೆಸುತ್ತಿರುವ ಪ್ರಯತ್ನಗಳನ್ನು ಅಣಕಿಸಿರುವ ದೀಪ್ಕೆ, “ನೀವು ಸಾಮಾಜಿಕ ಜಾಲತಾಣಗಳಲ್ಲಿ ಇನ್ಫ್ಲುಯೆನ್ಸರ್ ಆಗಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೀರಿ, ಆದರೆ ದೇಶವನ್ನು ಮುನ್ನಡೆಸಲು ಪ್ರಧಾನಿ ಹುದ್ದೆಯನ್ನು ಖಾಲಿ ಮಾಡಿ ಆ ಜವಾಬ್ದಾರಿಯನ್ನು ಮತ್ತೊಬ್ಬ ಸಮರ್ಥ ನಾಯಕರಿಗೆ ವಹಿಸಿಕೊಡಬೇಕು” ಎಂದು ಒತ್ತಾಯಿಸಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ನಂತರವೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಕಿರುಕುಳ ನಿಂತಿಲ್ಲ ಎಂದು ದೀಪ್ಕೆ ದೂರಿದ್ದಾರೆ. ಸಿಜೆಪಿ ವತಿಯಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಂಡ ನಂತರ ವಿವಿಧ ರಾಜ್ಯ ಸರಕಾರಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳು ಭಯೋತ್ಪಾದಕರಲ್ಲ, ಬದಲಿಗೆ ದೇಶದ ಭವಿಷ್ಯವಾಗಿದ್ದಾರೆ ಎಂದು ನೆನಪಿಸಿದರು. ಸರಕಾರ ತಕ್ಷಣವೇ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ಮುಂಬರುವ ಚುನಾವಣೆಗಳಲ್ಲಿ ವಿದ್ಯಾರ್ಥಿ ಸಮುದಾಯ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಹಾರಿಸಲು ಆದೇಶ ನೀಡಿದ ಅಧಿಕಾರಿಗಳು ಅಥವಾ ನಾಯಕರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅಭಿಜೀತ್ ದೀಪ್ಕೆ ಆಗ್ರಹಿಸಿದರು. ಕೇಂದ್ರ ಸರಕಾರವು ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಮತ್ತು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನೀಡಿದ ಭರವಸೆಗಳು ಕೇವಲ ಕಾಗದಕ್ಕಷ್ಟೇ ಸೀಮಿತವಾಗಿವೆ ಎಂದು ಟೀಕಿಸಿದ ಅವರು, ಸಿಬಿಐ ಪರ ವಕೀಲರು ಸಮಯಕ್ಕೆ ಸರಿಯಾಗಿ ಹಾಜರಾಗದ ಕಾರಣ ಮೊದಲ ವಿಚಾರಣೆಯೇ ಮುಂದೂಡಲ್ಪಟ್ಟಿರುವುದು ಸರಕಾರದ ನಿಷ್ಕಳಂಕತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ಇದೇ ವೇಳೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯ ಬಳಿಕ ಅವರನ್ನು ಸಂಸತ್ತಿನಲ್ಲಿ ಸನ್ಮಾನಿಸಿದ ಆಡಳಿತಾರೂಢ ಬಿಜೆಪಿಯ ನಡವಳಿಕೆಯನ್ನು ಖಂಡಿಸಿದ ದೀಪ್ಕೆ, ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಮಯದಲ್ಲಿ ಇಂತಹ ಸನ್ಮಾನ ಮಾಡಲು ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಸಿಜೆಪಿ ಪ್ರತಿಭಟನೆಗಳನ್ನು ಟೀಕಿಸಿದ್ದ ಬಿಜೆಪಿ ಸಂಸದೆ ಕಂಗನಾ ರಾಣಾವತ್ ಅವರನ್ನು ‘ಅರೆಕಾಲಿಕ ರಾಜಕಾರಣಿ’ ಎಂದು ಬಣ್ಣಿಸಿದ ಅವರು, ತಾವು ಗಂಭೀರ ರಾಜಕಾರಣಿಗಳ ಮಾತುಗಳಿಗೆ ಮಾತ್ರ ಪ್ರತಿಕ್ರಿಯಿಸುವುದಾಗಿ ಹೇಳಿ ಟೀಕೆಗಳನ್ನು ತಳ್ಳಿಹಾಕಿದರು.



