
ಹೈದರಾಬಾದ್, ಆಗಸ್ಟ್ 20, 2026: ಹಣ ಹಾಗೂ ಐಷಾರಾಮಿ ಜೀವನಶೈಲಿಯ ಆಸೆಯಿಂದ ಶಾಲಾ ಪ್ರಾಂಶುಪಾಲೆ ಹಾಗೂ ನಿರ್ದೇಶಕಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ತೆಲಂಗಾಣ ಪೊಲೀಸರು 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ನಲ್ಗೊಂಡ ಜಿಲ್ಲೆಯ ಕೊಂಡಮಲ್ಲೇಪಲ್ಲಿಯ ನಾಗಾರ್ಜುನ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಹಾಗೂ ನಿರ್ದೇಶಕಿ ಕಲ್ಲು ರೂಪಾ ರೆಡ್ಡಿ (48) ಅವರು ಆಗಸ್ಟ್ 12ರಂದು ತಮ್ಮ ನಿವಾಸದಲ್ಲಿ 27 ಇರಿತದ ಗಾಯಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಪ್ರಕರಣದ ತನಿಖೆಗಾಗಿ ಪೊಲೀಸರು ಐದು ತಂಡಗಳನ್ನು ರಚಿಸಿ, ಸಿಸಿಟಿವಿ ದೃಶ್ಯಾವಳಿ, ವಿಧಿವಿಜ್ಞಾನ ಸಾಕ್ಷ್ಯ, ಬೆರಳಚ್ಚು ಹಾಗೂ ತಾಂತ್ರಿಕ ದತ್ತಾಂಶಗಳನ್ನು ಪರಿಶೀಲಿಸಿದ್ದರು. 80ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿತ್ತು. ಈ ನಡುವೆ ರೂಪಾ ರೆಡ್ಡಿ ಅವರು ತಮ್ಮ ಚಿಕ್ಕಮ್ಮನೊಂದಿಗೆ ಮಾತನಾಡುವಾಗ ಕೊನೆಯದಾಗಿ ಬಳಸಿದ್ದ ‘ಬಾಬು’ ಎಂಬ ಪದ ತನಿಖೆಗೆ ಪ್ರಮುಖ ಸುಳಿವು ನೀಡಿದ್ದು, ಇದರ ಆಧಾರದಲ್ಲಿ ಶಾಲೆಯ ಕೆಲವು ವಿದ್ಯಾರ್ಥಿಗಳ ಮೇಲೆ ಪೊಲೀಸರು ಗಮನಹರಿಸಿದ್ದರು.
ತನಿಖೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಹಣ ಖರ್ಚು ಮಾಡುತ್ತಿದ್ದು, ಪಾರ್ಟಿಗಳನ್ನು ನಡೆಸುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಆರೋಪಿಗಳು ಸುಮಾರು ಐದು ದಿನಗಳ ಕಾಲ ಹತ್ಯೆಗೆ ಸಂಚು ರೂಪಿಸಿ, ಚಾಕು ಹಾಗೂ ಕೈಗವಸುಗಳನ್ನು ಖರೀದಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯ ದಿನ ಅವರಲ್ಲೊಬ್ಬರು ಮನೆಗೆ ನುಗ್ಗಿ ಸುಮಾರು 2.50 ಲಕ್ಷ ರೂ. ಹಣವನ್ನು ಕದಿಯಲು ಮುಂದಾಗಿದ್ದಾಗ ರೂಪಾ ರೆಡ್ಡಿ ಆತನನ್ನು ಗುರುತಿಸಿದ್ದಾರೆ. ಗುರುತು ಪತ್ತೆಯಾಗುವ ಭಯದಿಂದ ಆರೋಪಿ ಚಾಕುವಿನಿಂದ ಅವರಿಗೆ 27 ಬಾರಿ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಯ ಬಳಿಕ ಆರೋಪಿಗಳು ರಕ್ತದ ಕಲೆಗಳಿದ್ದ ಬಟ್ಟೆ ಹಾಗೂ ಮಂಕಿ ಕ್ಯಾಪ್ನ್ನು ಹೂತುಹಾಕಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದರು ಎನ್ನಲಾಗಿದೆ. ನಂತರ ಗೋವಾಕ್ಕೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ರಕ್ತದ ಕಲೆಗಳಿದ್ದ ನಗದು, ಖರೀದಿಸಿದ್ದ ಐಫೋನ್ ಹಾಗೂ ರೂಪಾ ರೆಡ್ಡಿ ಅವರ ಮೊಬೈಲ್ ಫೋನ್ ಸೇರಿದಂತೆ ಒಟ್ಟು 1.54 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



