ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ಅಂತ್ಯದವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಗಣೇಶ ಹಬ್ಬದ ಸಂಭ್ರಮಕ್ಕೆ ಮಳೆರಾಯ ಅಡ್ಡಿಯಾಗುವ ಸಾಧ್ಯತೆಗಳಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಆಗಸ್ಟ್ 27): ಬಂಗಾಳ ಕೊಲ್ಲಿಯಲ್ಲಿ (Bangala Kolli) ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವೆಡೆ ಆಗಸ್ಟ್ 31ರ ವರೆಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆಗಸ್ಟ್ 28ರಂದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಆ.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಆ.30ರಂದು ಕರಾವಳಿ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಆ.31 ಮತ್ತು ಸೆ. 01ರಂದು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮಳೆ
ಕೆಲ ಐದಾರು ದಿನಗಳಿಂದ ಸೈಲೆಂಟ್ ಆಗಿದ್ದ ಮಳೆರಾಯ ಇಂದು (ಆಗಸ್ಟ್ 27) ಗಣೇಶ ಹಬ್ಬದಂದೇ ಅಬ್ಬರಿಸಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಹಗುರ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದರೆ, ಕೆಲವೆಡೆ ಮಳೆರಾಯ ಅಡ್ಡಿಸಿದ್ದಾನೆ. ಗಣೇಶ ವಿಸರ್ಜೆ ಕಲಬುರಗಿ, ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು, ಹಬ್ಬದ ಸಂಭ್ರಮದಲ್ಲಿ ಜನರಿಗೆ ಕಿರಿಕಿರಿ ಉಂಟು ಮಾಡಿದೆ. ಮಳೆ ಇನ್ನೂ ಮೂರ್ನಾಲಕು ದಿನ ಇರುವುದರಿಂದ ಗಣೇಶ ವಿಸರ್ಜನೆಗೆ ಅಡ್ಡಿಯಾಗುವ ಸಾಧ್ಯತೆಗಳಿವೆ.




