

ನವೆಂಬರ್ ಕ್ರಾಂತಿ : ಕಳೆದ ಎರಡೂವರೆ ವರ್ಷಗಳಿಂದ ನಡೆಯುತ್ತಿರುವ ಚರ್ಚೆಗಳಿಗೆ ಹೊಸ ವರ್ಷಾರಂಭಕ್ಕೆ ಮುನ್ನವೇ ತೆರೆ ಬೀಳುವ ಸಾಧ್ಯತೆ ನಿಚ್ಚಳವಾಗಿದೆ. ಶೀಘ್ರದಲ್ಲಿ ಅಧಿಕಾರ ಹಂಚಿಕೆ ನಡೆಯುವುದು ಖಚಿತ ಮತ್ತು ಸಿಎಂ ಬದಲಾವಣೆ ನಿಶ್ಚಿತ ಎನ್ನಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಶೀಘ್ರದಲ್ಲೇ ಪದತ್ಯಾಗ ಮಾಡಲಿದ್ದು, ಡಿಸಿಎಂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಮಾಹಿತಿ ಲಭಿಸಿದೆ.
2023ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಲಭಿಸಿದ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಮತ್ತು ಡಿಕೆಶಿ ಸಮ್ಮುಖದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಸೂಚ್ಯವಾಗಿ ಮತ್ತು ಸೂಕ್ಷ್ಮವಾಗಿ ಚರ್ಚಿಸಿದ್ದರು. ಇಬ್ಬರು ನಾಯಕರ ನಡುವೆ ಅಧಿಕಾರ ಹಂಚಿಕೆಯ ಒಪ್ಪಂದ ನಡೆಯದಿದ್ದರೂ ಸಮಯ ಬಂದಾಗ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ತಲೆಬಾಗಬೇಕು ಎಂಬ ಸೂಚನೆಯನ್ನು ನೀಡಲಾಗಿತ್ತು. ಅಂದು ಡಿಕೆಶಿ ಅವರನ್ನು ಡಿಸಿಎಂ ಸ್ಥಾನಕ್ಕೆ ತೃಪ್ತಿಪಡಿಸಿದ್ದ ವರಿಷ್ಠರು 2028ಕ್ಕೆ ಮುಂಚಿತವಾಗಿ ಸಿಎಂ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಲು ನಿರ್ಧರಿಸಿ ಆ ವಿಚಾರವನ್ನು ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.ಹೈಕಮಾಂಡ್ ನಿರ್ದೇಶನದ ಮೇರೆಗೆ ಸಿದ್ದರಾಮಯ್ಯನವರು ಇದೇ ನವೆಂಬರ್ ತಿಂಗಳ 20ರೊಳಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ನವೆಂಬರ್ 21ಕ್ಕೆ ಡಿ.ಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ನಿರೀಕ್ಷೆ ಇದೆ ಎಂದು ಆಪ್ತ ಮೂಲಗಳು ತಿಳಿಸಿವೆ.
ನವೆಂಬರ್ 21ರ ಗಡಿದಾಟಿದರೆ ಮುಂದಿನ ಡಿಸೆಂಬರ್ ತಿಂಗಳ 10ನೇ ತಾರೀಖಿನಂದು ಡಿಕೆಶಿ ಪದಗ್ರಹಣ ಮಾಡುವುದು ಖಚಿತ ಎಂದು ತಿಳಿದುಬಂದಿದೆ.ಡಿಸೆಂಬರ್ 10ರ ಗಡಿಯೂ ದಾಟಿದರೆ 2026ರ ಫೆಬ್ರವರಿ ಮೊದಲ ವಾರದಲ್ಲಿ ಅಧಿಕಾರ ಹಂಚಿಕೆ ಜಾರಿಯಾಗುವ ಸಾಧ್ಯತೆ ಇದೆ. 2026ರ ಜನವರಿ ಅಂತ್ಯದ ತನಕ ಮುಖ್ಯಮಂತ್ರಿಯಾಗಿ ಮುಂದುವರಿದರೆ ದೀರ್ಘಾವಧಿ ಸಿಎಂ ಆಗಿರುವ ದೇವರಾಜು ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.



