ಬೆಂಗಳೂರು, ಆಗಸ್ಟ್ 02: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಕೊನೆಗೂ ಚುನಾವಣೆಯ ದಿನಾಂಕ ಫಿಕ್ಸ್ ಆಗಿದೆ.
ಐದಾರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿತ್ತು. 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಪ್ರತಿ ವರ್ಷವೂ ಒಂದಲ್ಲ ಒಂದು ವಿಚಾರವಾಗಿ ಬಿಬಿಎಂಪಿ ಚುನಾವಣೆಯನ್ನ ಮುಂದೂಡಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಕ್ಕಂತಾಗಿದ್ದು, ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್ನಲ್ಲಿ ಚುನಾವಣೆ ನಡೆಸುತ್ತೇವೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಅಗತ್ಯವಿದ್ದರೆ ನವೆಂಬರ್ ಒಳಗೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ. ಬಿಬಿಎಂಪಿ ಚುನಾವಣೆಯನ್ನ ಸರ್ಕಾರ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ವು. ಇದೀಗ ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಮುಂದಾಗಿದ್ದು, ಬಿಬಿಎಂಪಿ ವಾರ್ಡ್ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.
ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್ನಲ್ಲಿ, ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ. ಹಿಂದಿನ ಬಿಬಿಎಂಪಿಯ ಸದಸ್ಯರ ಅಧಿಕಾರ ಅವಧಿ 2020 ಸೆಪ್ಟೆಂಬರ್ 10ರಂದು ಮುಕ್ತಾಯಗೊಂಡಿತ್ತು. ಡಿಸೆಂಬರ್ 18ರಂದು ಬೆಂಗಳೂರು ಆಡಳಿತಕ್ಕೆ ಅಂಗೀಕರಿಸಲಾದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್ಗಳ ಬದಲಿಗೆ 198 ವಾರ್ಡ್ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಮುಂದಾಗಿದೆ.




